ಕೀರ್ತ. 30. ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು. ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು. ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ. ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ. ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು. ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು. ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು. ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ, “ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು? ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು. ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.