ಕೀರ್ತ. 62. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ. ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು. ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ? ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ. ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ. ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ. ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ. ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ. ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ. ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.